ಹೊಸನಗರ: ಪಟಗುಪ್ಪ ಸೇತುವೆ ಬಳಿ ಗೋವು ಹತ್ಯೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಸ್ಥಳೀಯರ ಒತ್ತಾಯ
ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಪಟಗುಪ್ಪ ಸೇತುವೆ ಸಮೀಪ ಗೋವೊಂದನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಂಜೆ ಸುಮಾರು 4 ಗಂಟೆ ವೇಳೆಗೆ ನಾಲ್ವರು ಯುವಕರು ಮೀನು ಹಿಡಿಯುವ ನೆಪದಲ್ಲಿ ಈ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ. ಬಳಿಕ ಅಲ್ಲಿದ್ದ ಗೋವೊಂದರ ಮೇಲೆ ದಾಳಿ ನಡೆಸಿ ಕುತ್ತಿಗೆಗೆ ಗಂಭೀರ ಗಾಯಪಡಿಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ಘಟನೆ ನಡೆಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಜನರು ಬರುತ್ತಿರುವುದನ್ನು ಕಂಡ ವ್ಯಕ್ತಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಗೋವು ಸ್ಥಳದಲ್ಲೇ ಮೃತಪಟ್ಟಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳೀಯರು ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಗೋರಕ್ಷಕರು ಹಾಗೂ ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದಲ್ಲದೆ, ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಸಂಬಂಧಿತ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ಹೊರಗಿನಿಂದ ಬರುವ ಅಪರಿಚಿತರ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಈ ಭಾಗದಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಮತ್ತು ತಾಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒಕ್ಕೊರಲಿನ ಆಗ್ರಹವಾಗಿದೆ.






