ರಿಪ್ಪನ್ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ
ರಿಪ್ಪನ್ಪೇಟೆ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಶೆಟ್ಟಿಬೀಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಾಲ್ಕು ಬಾರಿ ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಸುಗುಂಡಿ ಗ್ರಾಮದ ಗಿರಿಜಮ್ಮ (60), ದರ್ಶನ್ (22) ಹಾಗೂ ಹರ್ಷಿತಾ (22) ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಿರಿಜಮ್ಮ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಚಾಲಕ ದರ್ಶನ್ ಅವರ ಎದೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹರ್ಷಿತಾ ಅವರ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ರಿಪ್ಪನ್ಪೇಟೆ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಯಿತು.
ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






