ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ
ಆನಂದಪುರ, ಜು.13: ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿರುವ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ, ಕಾಡಿನ ಮಧ್ಯೆ ನಡೆಯುತ್ತಿದ್ದ ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ ದಿಢೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಜುಲೈ 12ರಂದು ಮಧ್ಯಾಹ್ನ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಯಾವುದೇ ಅನುಮತಿಯಿಲ್ಲದೆ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ, ಸ್ಥಳದಲ್ಲಿದ್ದ ಕೆಲವರು ಪರಾರಿಯಾಗಿದ್ದು, ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹4,200 ನಗದು ಹಾಗೂ ₹1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಸಂತೋಷ್ (ಆನಂದ ಪುತ್ರ), ಶಿವು (ನಾಗರಾಜ ಪುತ್ರ) ಹಾಗೂ ಶಾಬಾಷ್ (ಭಾಷಾಸಾಬ್ ಪುತ್ರ) ಎಂದು ಗುರುತಿಸಲಾಗಿದೆ.
ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.






